ಕುಡಿಯುವ ನೀರು ಕಾಮಗಾರಿ ಸಮರ್ಪಕ ಅನುಷ್ಠಾನಕ್ಕೆ ಲೋಕಸಭಾ ಸದಸ್ಯರಾದ ಸುನಿಲ್ ಬೋಸ್ ಸೂಚನೆ
ಚಾಮರಾಜನಗರ:ಕೇಂದ್ರಪುರಸ್ಕøತ ಅಮೃತ್ 2.0 ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಿಗೆ ಕುಡಿಯುವ ನೀರು ಸರಬರಾಜು ಕಾಮಗಾರಿಯನ್ನು ಸಮರ್ಪಕವಾಗಿ ಅನುಷ್ಟಾನಗೊಳಿಸುವಂತೆ ಲೋಕಸಭಾ ಸದಸ್ಯರಾದ ಸುನಿಲ್ ಬೋಸ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ನಡೆದ ಚಾಮರಾಜನಗರ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಮೃತ್ 2.0 ಯೋಜನೆ ಹಾಗೂ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಕಾಮಗಾರಿ ನಡೆಯುವ ಸಂದರ್ಭದಲ್ಲಿ ಅಧಿಕಾರಿಗಳು ಕ್ಷೇತ್ರ ಪ್ರವಾಸ ಕೈಗೊಂಡು ಖುದ್ದು ಸ್ಥಳ ಪರಿಶೀಲನೆ ಮಾಡಬೇಕು. ಸಮರ್ಪಕವಾಗಿ ಪೈಪ್ಲೈನ್ ಅಳವಡಿಸಬೇಕು. ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು. ಮುಂದಿನ ದಿನಗಳಲ್ಲಿ ಕುಡಿಯುವ ನೀರಿನ ಬಗ್ಗೆ ಜನರಿಂದ ದೂರು ಬರದಂತೆ ನೋಡಿಕೋಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳು ಕೇಂದ್ರ ಪುರಸ್ಕøತ ಯೋಜನೆಗಳನ್ನು ಜನರಿಗೆ ತಲುಪಿಸಲು ಮುಂದಾಗಬೇಕು. ರೈತರಿಗೆ ಸೌಲಭ್ಯಗಳ ಮಾಹಿತಿ ನೀಡಬೇಕು. ಅರ್ಹ ರೈತರಿಗೆ ಸವಲತ್ತುಗಳು ದೊರೆಯಬೇಕು. ಫಲಾನುಭವಿಗಳ ಆಯ್ಕೆ ಪಾರದರ್ಶಕವಾಗಿರಬೇಕು. ಅಧಿಕಾರಿಗಳು ಕ್ಷೇತ್ರದಾದ್ಯಂತ ಪ್ರವಾಸ ಮಾಡಿ ಯೋಜನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು. ಕೃಷಿ ಯಾಂತ್ರೀಕರಣ ಯೋಜನೆಗಳ ಸವಲತ್ತು ವಿತರಣೆ ಕುರಿತು ಆಯಾ ಕ್ಷೇತ್ರದ ಶಾಸಕರ ಗಮನಕ್ಕೆ ತರಬೇಕು ಎಂದರು.
ನಗರದ ಸಂತೇಮರಹಳ್ಳಿ ರಸ್ತೆಯ ದೊಡ್ಡರಾಯಪೇಟೆ ಜಂಕ್ಷನ್ನಲ್ಲಿ ಸಾಕಷ್ಟು ಅಪಘಾತಗಳು ಸಂಭವಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ ಯೋಜನೆಯಡಿ ಅಲ್ಲಿ ವೃತ್ತವೊಂದನ್ನು ನಿರ್ಮಿಸಬೇಕು. ನೂತನವಾಗಿ ಬೈಪಾಸ್ ರಸ್ತೆಯಾಗಿರುವುದರಿಂದ ಅಲ್ಲಿ ನಾಮಫಲಕಗಳು ಅವಶ್ಯವಾಗಿವೆ. ಪ್ರತಿ 3 ತಿಂಗಳಿಗೊಮ್ಮೆ ರಸ್ತೆ ಸುರಕ್ಷತಾ ಸಭೆ ಏರ್ಪಡಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಗುಂಡ್ಲುಪೇಟೆ ಪಟ್ಟಣದಲ್ಲಿ ರಸ್ತೆ ಕಾಮಗಾರಿ ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಲೋಕಸಭಾ ಸದಸ್ಯರು ಅಧಿಕಾರಿಗಳಿಗೆ ನಿದೇಶನ ನೀಡಿದರು ಮಾತನಾಡಿದ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಹರದನಹಳ್ಳಿಯ ಬಂಡಿಗೆರೆಯಿಂದ ಅಮಚವಾಡಿಗೆ ಹೋಗುವ ರಸ್ತೆಯಲ್ಲಿ 250 ಮೀ. ರಸ್ತೆ ಕಾಮಗಾರಿ ಅಂದಾಜುಪಟ್ಟಿಯಲ್ಲಿ ಅನುಮೋದನೆಗೊಂಡಿದ್ದರೂ ರಸ್ತೆ ಕಾಮಗಾರಿ ಆಗಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು. ಅಲ್ಲದೇ ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ ಚಾಮರಾಜನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಆಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ಅಧಿಕಾರಿಗಳು ಖುದ್ದಾಗಿ ಪರಿಶೀಲಿಸಿ ವರದಿ ಸಲ್ಲಿಸುವಂತೆ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಕೇಂದ್ರಪುರಸ್ಕøತ ಯೋಜನೆಗಳನ್ನು ಪರಿಶೀಲಿಸಿದ ಲೋಕಸಭಾ ಸದಸ್ಯರು ಕೇಂದ್ರ ಹಾಗೂ ರಾಜ್ಯಸರ್ಕಾರಗಳು ಮಕ್ಕಳ ಪೌಷ್ಠಿಕ ಆಹಾರಕ್ಕೆ ಸಾಕಷ್ಟು ಅನುದಾನ ನೀಡುತ್ತಿವೆ. ಅನುದಾನ ಸದ್ಭಳಕೆ ಮಾಡಿಕೊಂಡು ಅಪೌಷ್ಠಿಕತೆಯನ್ನು ಸಂಪೂರ್ಣ ನಿವಾರಣೆಗೆ ಅಧಿಕಾರಿಗಳು ಮುಂದಾಗಬೇಕು. ಜಿಲ್ಲೆಯ ಕಾಡಂಚಿನ ಪ್ರದೇಶಗಳು ಹಾಗೂ ಹಾಡಿಗಳಿಗೆ ಪೌಷ್ಠಿಕ ಆಹಾರ ಸಮರ್ಪಕ ವಿತರಣೆಯಾಗಬೇಕು. ಬಾಲ್ಯವಿವಾಹ ನಿಯಂತ್ರಣ ಪರಿಣಾಮಕಾರಿಯಾಗಿ ಆಗಬೇಕು ಎಂದರು.
ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಆಸ್ಪತ್ರೆಗಳಲ್ಲಿ ಜನರಿಗೆ ಅಗತ್ಯ ಔಷಧಗಳು ದಾಸ್ತಾನು ಇಟ್ಟುಕೊಳ್ಳಬೇಕು. ಕ್ಲಿನಿಕ್ಗಳಿಗೆ ಚೀಟಿ ಬರೆಯಬಾರದು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸಂಜೆ 4 ಗಂಟೆಯ ಬಳಿಕ ವೈದ್ಯರು ಇರುವುದಿಲ್ಲ ಎಂಬ ದೂರುಗಳು ಸಾಕಷ್ಟಿವೆ. ಇದನ್ನು ಸರಿಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಸೆಂಟರ್ಗಳ ಅವಶ್ಯವಿದ್ದರೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಂಸದರು ತಿಳಿಸಿದರು.
ಜಿಲ್ಲೆಯ ಹಾಡಿ-ಪೋಡುಗಳಿಗೆ ವಿದ್ಯುತ್ ವ್ಯವಸ್ಥೆಗಾಗಿ ನೀಡಿರುವ ಸೋಲಾರ್ಗಳು ಕೆಟ್ಟುಹೋಗಿದ್ದು, ಯುಜಿ ಕೇಬಲ್ ಅಳವಡಿಸುವ ಮೂಲಕ ಶಾಶ್ವತ ವಿದ್ಯುತ್ ಒದಗಿಸುವ ಕಾಮಗಾರಿ ಸದ್ಯದಲ್ಲಿಯೇ ಆರಂಭವಾಗಲಿದೆ. ಇದಕ್ಕೆ ಅರಣ್ಯ ಇಲಾಖೆ ಅಡ್ಡಿಪಡಿಸಬಾರದು. ಚೆಂಗಡಿ ಹಾಗೂ ಮೆಂದಾರೆ ಗ್ರಾಮಗಳ ಸ್ಥಳಾಂತರ ಹಾಗೂ ಪುನರ್ವಸತಿ ಕಾರ್ಯ ಚುರುಕುಗೊಳ್ಳಬೇಕು. ಹಾಡಿಗಳಲ್ಲಿ ಹನಿ ನೀರಾವರಿಗಾಗಿ 47 ಮಂದಿ ಹಣ ಪಾವತಿಸಿದ್ದು, ಯೋಜನೆಯು ತ್ವರಿತವಾಗಿ ಫಲಾನುಭವಿಗಳನ್ನು ತಲುಪಬೇಕು ಎಂದು ಸೂಚಿಸಿದರು.
ಅನ್ನಭಾಗ್ಯ ಯೋಜನೆಯಡಿ ಬಡವರಿಗೆ ವಿತರಿಸುತ್ತಿರುವ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಅವಶ್ಯವಿದ್ದರೆ ಹೆಚ್ಚುವರಿ ಉದ್ಯೋಗ ಸೃಜಿಸಿ ಕೆಲಸ ನೀಡಬೇಕು. ತಾಲೂಕು ಕಚೇರಿ ಹಾಗೂ ಉಪ ನೊಂದಣಾಧಿಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಪಿಂಚಣಿ ನೀಡುವ ಕಾರ್ಯದಲ್ಲಿ ಜನರನ್ನು ಕಚೇರಿಗೆ ಅಲೆದಾಡಿಸಬಾರದೆಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಸದ ಸುನಿಲ್ ಬೋಸ್ ಅವರು ತಾಕೀತು ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಎಲ್ಲಾ ತಾಲೂಕು ಕಚೇರಿ, ನಾಡಕಚೇರಿ ಹಾಗೂ ಉಪ ನೊಂದಣಾಧಿಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳನ್ನು ನಿಯಂತ್ರಿಸಲು ಅವಶ್ಯ ನಾಮಫಲಕ ಅಳವಡಿಸಲಾಗಿದೆ. ಸಕಾಲದಲ್ಲಿ ಪಿಂಚಣಿಗಳನ್ನು ಅರ್ಹರಿಗೆ ತಲುಪಿಸಲಾಗುತ್ತಿದೆ. ಪೌತಿ ಆಂದೋಲನವನ್ನು ಅಭಿಯಾನ ಮಾದರಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದರು.
ಶಾಸಕರಾದ ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೋಷ್ ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸಭೆಯಲ್ಲಿ ಉಪಸ್ಥಿತರಿದ್ದರು.