*ಗ್ರಾಹಕರ ಕಾನೂನು ಅರಿವು ಅವಶ್ಯವಾಗಿದೆ : ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಹೆಚ್. ಎನ್ . ಶ್ರೀನಿಧಿ*
ಚಾಮರಾಜನಗರ: ಡಿಸೆಂಬರ್ 24 ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರು ಗ್ರಾಹಕರೇ ಆಗಿರುವುದರಿಂದ ಗ್ರಾಹಕರ ಹಕ್ಕುಗಳ ಅರಿವು ಎಲ್ಲರಿಗೂ ಅವಶ್ಯವಾಗಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಹೆಚ್.ಎನ್. ಶ್ರೀನಿಧಿ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ‘ರಾಷ್ಟ್ರೀಯ ಗ್ರಾಹಕ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಹಕರು ವಸ್ತುವನ್ನು ಖರೀದಿಸಿದಾಗ ರಶೀದಿಯನ್ನು ತೆಗೆದುಕೊಳ್ಳಬೇಕು. ಬಳಿಕ ಖರೀದಿಸಿದ ವಸ್ತು ಗುಣಮಟ್ಟದಿಂದ ಕೂಡಿಲ್ಲವೆಂಬುದು ಕಂಡುಬಂದಾಗ ಅಥವಾ ಯಾವುದಾದರೂ ನಷ್ಟ ಹಾಗೂ ತೊಂದರೆ ಉಂಟಾದಲ್ಲಿ ರಶೀದಿ ಮೂಲಕ ಗ್ರಾಹಕರ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿ ಪರಿಹಾರ ಪಡೆಯಬಹುದಾಗಿದೆ. ಯಾವುದೇ ವಸ್ತುವನ್ನು ಖರೀದಿಸುವಾಗ ಅದರ ಗುಣಮಟ್ಟವನ್ನು ಸೂಕ್ಷ್ಮವಾಗಿ ಪರಿಶೀಲಿಸಿ ತೆಗೆದುಕೊಳ್ಳಿ ಎಂದು ಸಲಹೆ ಮಾಡಿದರು.
ಗ್ರಾಹಕರಿಗೆ ಹೆಚ್ಚಿನ ಅರಿವು ಮೂಡಿಸಲು ಹಾಗೂ ಗ್ರಾಹಕರ ಕುಂದುಕೊರತೆಗಳನ್ನು ಜಿಲ್ಲಾ ಗ್ರಾಹಕ ನ್ಯಾಯಾಲಯದಲ್ಲಿ ಗ್ರಾಹಕ ಆಯೋಗಗಳಿಂದ ಪರಿಹರಿಸಿಕೊಳ್ಳುವ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಗ್ರಾಹಕರ ದಿನವನ್ನು ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ವಸ್ತುವನ್ನು ಖರೀದಿಸಿದಾಗ ತಪ್ಪದೆ ಸಂಬಂಧಿಸಿದ ರಶೀದಿಯನ್ನು ಪಡೆದುಕೊಳ್ಳಬೇಕು. ಅದೇ ರೀತಿ ಇತ್ತೀಚಿಗೆ ಹೆಚ್ಚುತ್ತಿರುವ ಆನ್ಲೈನ್ ಖರೀದಿ ವ್ಯವಹಾರಗಳ ಬಗ್ಗೆಯೂ ಎಚ್ಚರವಹಿಸುವಂತೆ ಶ್ರೀನಿಧಿ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ಮಾತನಾಡಿ ಕಾನೂನಿನ ಅಡಿಯಲ್ಲಿ ಎಲ್ಲರೂ ಸಮಾನರು. ಯಾರೇ ತಪ್ಪು ಮಾಡಿದರೂ ಕ್ಷಮೆ ಇರುವುದಿಲ್ಲ. ಸಂವಿಧಾನವು ನಮಗೆ ಮೂಲಭೂತ ಹಕ್ಕು ಮತ್ತು ಕರ್ತವ್ಯಗಳನ್ನು ನೀಡಿದೆ. ನಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಹಾಗೂ ಮತ್ತಷ್ಟು ಜನರಿಗೆ ಗ್ರಾಹಕರ ಕಾನೂನುಗಳ ಕುರಿತು ಅರಿವು ಮೂಡಿಸಲು ಕಾನೂನನ್ನು ಕನಿಷ್ಠ ಮಟ್ಟಿಗೆ ತಿಳಿದುಕೊಂಡಿರಬೇಕು ಎಂದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮಹಿಳಾ ಸದಸ್ಯರಾದ ಭಾರತಿ ಅವರು ಮಾತನಾಡಿ ಪ್ರಕರಣಗಳಲ್ಲಿ ಸತ್ಯತೆ ಇದ್ದರೆ ಮಾತ್ರ ಆಯೋಗದ ಮುಂದೆ ದೂರು ಸಲ್ಲಿಸಬೇಕು. ಪ್ರಸ್ತುತ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಕೋರ್ಸು ವ್ಯಾಸಂಗ ಮಾಡಿದರೆ ಕೆಲಸ ಕೊಡಿಸುವುದಾಗಿ ಮೋಸ ಮಾಡುವುದು, ಅಂಕಪಟ್ಟಿ ಕೊಡಲು ತಡ ಮಾಡುವುದು, ಪದವಿ ಪ್ರಮಾಣ ಪತ್ರ ನೀಡದೆ ತಡ ಮಾಡಿ ತೊಂದರೆ ನೀಡಿದರೆ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಬಹುದು ಎಂದರು.
ಕಾನೂನು ಮಾಪನ ಶಾಸ್ತ್ರ ಇಲಾಖೆಯ ಸಹಾಯಕ ನಿಯಂತ್ರಕರಾದ ಎನ್ .ಶ್ರೀಧರ್ ಅವರು ತೂಕ ಮತ್ತು ಅಳತೆ ಕುರಿತು ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಯೋಗಾನಂದ ಅವರು ಮಾತನಾಡಿ ಪ್ರಾಸ್ತಾವಿಕವಾಗಿ ಮಾತನಾಡಿ ಭಾರತದಲ್ಲಿ 1986 ಡಿಸೆಂಬರ್ 24ರಂದು ಗ್ರಾಹಕರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಲಾಯಿತು. ಪ್ರತಿವರ್ಷ ಡಿಸೆಂಬರ್ 24ರಂದು ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಶಿವರಾಜಮ್ಮ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.