ಹಸಿರುಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್–ಸುನೀಲ್ ಬೋಸ್

ಚಾಮರಾಜನಗರ:ಹಸಿರುಕ್ರಾಂತಿಯ ಹರಿಕಾರ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರು ಸುದೀರ್ಘ ಕಾಲ ಕೇಂದ್ರ ಸಚಿವರಾಗಿ ದೇಶಕ್ಕೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ತಿಳಿಸಿದರು.
ಚಾಮರಾಜನಗರ ನಗರದ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‍ರವರ 118ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡಾ. ಬಾಬು ಜಗಜೀವನರಾಮ್ ಅವರು ಕೇಂದ್ರದಲ್ಲಿ ಸಚಿವರಾಗಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದರು. ಕಾರ್ಮಿಕ ಸಚಿವರಾಗಿದ್ದ ಸಂದರ್ಭದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಅಲ್ಲದೆ ಎಲ್ಲ ಕಾರ್ಮಿಕರಿಗು ಅನುಕೂಲವಾಗುವ ಸುಧಾರಣೆಗಳನ್ನು ಜಾರಿಗೆ ತಂದರು. ಕಾರ್ಮಿಕರಿಗೆ ವಿಮಾ ಸೌಲಭ್ಯವನ್ನು ಕಲ್ಪಿಸಿದ ಹೆಗ್ಗಳಿಕೆ ಡಾ. ಬಾಬು ಜಗಜೀವನ್ ರಾಮ್ ಅವರಿಗೆ ಸಲ್ಲುತ್ತದೆ ಎಂದರು.

ಡಾ. ಬಾಬು ಜಗಜೀವನರಾಮ್ ಅವರು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗಾಗಿ ಆಯೋಗವನ್ನು ನೇಮಕ ಮಾಡಿದರು. ವಿಮಾನಯಾನ ಸಚಿವರಾಗಿದ್ದ ಅವಧಿಯಲ್ಲಿ ಖಾಸಗೀಕರಣಗೊಂಡಿದ್ದ ವಿಮಾನಸೇವೆ ರಾಷ್ಟ್ರೀಕರಣ ಗೊಳಿಸಿದರು. ಬ್ಯಾಂಕುಗಳ ರಾಷ್ಟ್ರೀಕರಣಕ್ಕೆ ಇಂದಿರಾಗಾಂಧಿಯವರಿಗೆ ಸಲಹೆ ನೀಡಿದ್ದರು. ರಕ್ಷಣಾ ಸಚಿವರಾಗಿದ್ದ ಸಂದರ್ಭದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು ಎಂದು ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ತಿಳಿಸಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಬಾಬು ಜಗಜೀವನರಾಮ್ ಅವರು ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದರು. ಕಾರ್ಮಿಕರ ಹಿತರಕ್ಷಣೆಗಾಗಿ ಉತ್ತಮ ಯೋಜನೆಗಳನ್ನು ಜಾರಿಗೆ ತಂದರು. ಹಲವಾರು ಖಾತೆಗಳನ್ನು ಕೇಂದ್ರದಲ್ಲಿ ನಿರ್ವಹಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದರು.

ಡಾ. ಬಾಬು ಜಗಜೀವನರಾಮ್ ಅವರ ಆದರ್ಶ ಕೊಡುಗೆಗಳು ನಮಗೆ ಮಾರ್ಗದರ್ಶನವಾಗಿದೆ. ಅವರ ಕರ್ತವ್ಯ ನಡೆ ನುಡಿಯನ್ನು ಎಲ್ಲರು ಅನುಸರಿಸಬೇಕಿದೆ. ಅವರು ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯಬೇಕಿದೆ. ಎಂತಹುದೇ ಕಷ್ಟ ಕಾಲದಲ್ಲೂ ಅವರು ನಂಬಿದ್ದ ಆದರ್ಶಗಳನ್ನು ಬಿಟ್ಟುಕೊಡಲಿಲ್ಲ. ಇದು ನಮ್ಮೆಲ್ಲರಿಗೆ ಮಾದರಿಯಾಗಬೇಕಿದೆ ಎಂದು ಶಾಸಕರಾದ ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳನ್ನಾಡಿ ಜೊತೆಗೆ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರ ಸಂದೇಶ ವಾಚಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸ್ವಾತಂತ್ರ್ಯ ಹೋರಾಟಗಾರರು ಆಗಿದ್ದ ಬಾಬು ಜಗಜೀವನರಾಮ್ ಅವರು ರಕ್ಷಣಾ ಸಚಿವರು ಹಾಗು ಕೃಷಿ ಸಚಿವರಾಗಿದ್ದ ಅವಧಿಯಲ್ಲಿ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ಕೃಷಿಯಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿಸಿದಲ್ಲದೇ ಹಲವು ವಿನೂತನ ಸುಧಾರಣಾ ಕ್ರಮಗಳನ್ನು ಜಾರಿಗೆ ತಂದು ಹಸಿರುಕ್ರಾಂತಿಯ ಹರಿಕಾರರೆಂದೇ ಕರೆಯಲ್ಪಟ್ಟರು ಎಂದರು.

ಮುಖ್ಯ ಭಾಷಣ ಮಾಡಿದ ಭೋಗಾಪುರ ಸರ್ಕಾರಿ ಪ್ರಥಮ ದರ್ಜೆ ವಸತಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಪಿ. ದೇವರಾಜು ಅವರು ಸಾಮಾಜಿಕ ವ್ಯವಸ್ಥೆಯನ್ನು ಅರ್ಥ ಮಾಡಿಕೊಂಡಿದ್ದ ಬಾಬು ಜಗಜೀವನ್ ರಾಮ್ ಅವರು ಶೋಷಿತ ವರ್ಗಗಳ ಏಳಿಗೆಗಾಗಿ ಅಪಾರವಾಗಿ ಶ್ರಮಿಸಿದ್ದಾರೆ. 27ನೇ ವಯಸ್ಸಿಗೆ ಸಂಸದರಾಗಿದ್ದ ಬಾಬೂಜಿ ಅವರು ಸುಧೀರ್ಘ ಕಾಲ ರಾಜಕೀಯ ಅಧಿಕಾರ ಅನುಭವಿಸಿದ್ದರು. ರೈಲ್ವೆ, ಸಂಪರ್ಕ ಸಚಿವರಾಗಿದ್ದ ವೇಳೆ ಹೊಸ ಸಾಧನಾ ವ್ಯವಸ್ಥೆಗಳನ್ನು ಅಂದೇ ಪರಿಚಯಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಟ್ಟಿದ್ದರು. ಡಾ. ಬಾಬು ಜಗಜೀವನ್‍ರಾಮ್ ಅವರ ಜನ್ಮ ದಿನವನ್ನು ಸಮಾನತೆಯ ದಿನವನ್ನಾಗಿಯೂ ಆಚರಿಸಲಾಗುತ್ತಿದೆ ಎಂದರು.

ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್, ನಗರಸಭಾ ಸದಸ್ಯರಾದ ನಾಗರಾಜು, ಸ್ವಾಮಿ, ಚೂಡಾ ಸದಸ್ಯರಾದ ಪುಟ್ಟಸ್ವಾಮಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕರಾದ ಎನ್. ಮುನಿರಾಜು, ತಹಶೀಲ್ದಾರ್ ಗಿರಿಜಾ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕಿರಣ್ ಪಡ್ನೇಕರ್, ನಗರಸಭಾ ಆಯುಕ್ತರಾದ ಎಸ್.ವಿ. ರಾಮದಾಸ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿ ಆರ್ ಉಮೇಶ್ ಮಲಾರಪಾಳ್ಯ